ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ 400 ಪಶುವೈದ್ಯಾಧಿಕಾರಿಗಳ ನೇರ ನೇಮಕಾತಿ ಮುಖಾಂತರ ಹಾಗೂ ಹೆಚ್ಚುವರಿಯಾಗಿ 400 ಪಶುವೈದ್ಯಾಧಿಕಾರಿಗಳ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ (K Venkatesh) ತಿಳಿಸಿದ್ದಾರೆ.
ಹೊರಗುತ್ತಿಗೆ ಆಧಾರದಲ್ಲಿ ನೇಮಕ
ವಿಧಾನಸಭೆಯಲ್ಲಿಂದು ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಶುವೈದ್ಯಕೀಯ ಪರೀಕ್ಷಕರ 300 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಪರಿಶೀಲನೆ ಹಂತದಲ್ಲಿದೆ ಎಂದು ತಿಳಿಸಿದರು.
ಸಂಚಾರಿ ಪಶುಚಿಕಿತ್ಸಾಲಯ
“ಪಶು ಸಂಜೀವಿನಿ” ಸಹಾಯವಾಣಿ ಸಂಖ್ಯೆ 1962ಕ್ಕೆ ಕರೆ ಮಾಡಿದರೆ ಸಂಚಾರಿ ಪಶುಚಿಕಿತ್ಸಾಲಯ ವಾಹನಗಳ ಸೌಲಭ್ಯದೊಂದಿಗೆ ರೈತರ ಮನೆಬಾಗಿಲಿಗೆ ತೆರಳಿ ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಸಚಿವ ಕೆ. ವೆಂಕಟೇಶ್ ಮಾಹಿತಿ ನೀಡಿದರು.
ಇದನ್ನೂ ಓದಿ: ವಿಶ್ವವಿದ್ಯಾಲಯದ ಖಾಲಿ ಹುದ್ದೆಗಳ ಶೀಘ್ರ ಭರ್ತಿ: ಎಂ.ಸಿ. ಸುಧಾಕರ್
