ಕೋಲ್ಕತಾ: ಪಶ್ಚಿಮ ಬಂಗಾಳದ (West Bengal) ರಾಜಧಾನಿ ಕೋಲ್ಕತಾದ ತಾರಾತಲಾ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭೀಕರ ದುರಂತವೊಂದು (Tragedy) ಸಂಭವಿಸಿದೆ. ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಬೃಹತ್ ಗೋದಾಮಿನ (Warehouse) ಮೇಲ್ಛಾವಣಿ ದಿಢೀರನೆ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ಮೇಲ್ಛಾವಣಿ ಕುಸಿದ ತೀವ್ರತೆಗೆ ಕಟ್ಟಡದ ಒಳಗಡೆ ಕೆಲಸ ಮಾಡುತ್ತಿದ್ದ ಕನಿಷ್ಠ 40ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.
ಗೋದಾಮಿನ ಒಳಗಿದ್ದ ಕೂಲಿ ಕಾರ್ಮಿಕರು
ಗೋದಾಮಿನಲ್ಲಿ ಎಂದಿನಂತೆ ಹಲವಾರು ಮಂದಿ ಕೂಲಿ ಕಾರ್ಮಿಕರು ಕಟ್ಟಡ ನಿರ್ಮಾಣದ ಕೆಲಸದಲ್ಲಿ ನಿರತರಾಗಿದ್ದಾಗ ಈ ಅವಘಡ ಸಂಭವಿಸಿದೆ. ಮೇಲ್ಛಾವಣಿ ಕುಸಿಯುತ್ತಿದ್ದಂತೆಯೇ ಸ್ಥಳೀಯರು ತಕ್ಷಣವೇ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಪಡೆಗಳು ಅತ್ಯಾಧುನಿಕ ಉಪಕರಣಗಳೊಂದಿಗೆ ಸ್ಥಳಕ್ಕೆ ಧಾವಿಸಿ ಜೆಸಿಬಿಗಳ ನೆರವಿನಿಂದ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಚುರುಕುಗೊಳಿಸಿವೆ. ಮಧ್ಯಾಹ್ನ 12:20 ರ ಸುಮಾರಿಗೆ ಈ ದುರಂತದ ಬಗ್ಗೆ ತಮಗೆ ಮೊದಲ ಕರೆ ಬಂದಿರುವುದಾಗಿ ಅಗ್ನಿಶಾಮಕ ಇಲಾಖೆಯ ಉನ್ನತ ಅಧಿಕಾರಿಗಳು ಖಚಿತಪಡಿಸಿದ್ದಾರೆ.
7 ಜನರು ಸುರಕ್ಷಿತ
ರಕ್ಷಣಾ ಕಾರ್ಯಾಚರಣೆ ತೀವ್ರವಾಗಿ ಮುಂದುವರಿದಿದ್ದು, ಇದುವರೆಗೆ ಆರು ಜಂಟಿ ಪಡೆಗಳಿಂದ ರಿಂದ ಏಳು ಜನರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಅವಶೇಷಗಳ ಅಡಿಯಿಂದ ಕೆಸರು ಮತ್ತು ಧೂಳಿನಿಂದ ಮುಚ್ಚಿಹೋಗಿದ್ದ ಗಾಯಾಳುಗಳನ್ನು ಸ್ಟ್ರೆಚರ್ಗಳ ಮೂಲಕ ಹೊರಗೆ ತರುತ್ತಿರುವ ದೃಶ್ಯಗಳು ಹೃದಯ ವಿದ್ರಾವಕವಾಗಿದ್ದವು. ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಇನ್ನು ಈ ಕಟ್ಟಡದ ನಿರ್ಮಾಣ ಕಾರ್ಯದ ಗುಣಮಟ್ಟದ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಿಮೆಂಟ್ ಕಾಂಕ್ರೀಟ್ ಮೇಲ್ಛಾವಣಿಯ ಅಡಿಯಲ್ಲಿ ಕಳಪೆ ದರ್ಜೆಯ ತಗಡಿನ ಶೀಟ್ಗಳನ್ನು ಬಳಸಿ ಕಾಮಗಾರಿ ನಡೆಸಲಾಗುತ್ತಿತ್ತು ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
