ಬೆಂಗಳೂರು: “ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ವೃತ್ತಿಪರತೆಯನ್ನು ಪ್ರದರ್ಶಿಸುವ ಮೂಲಕ ಇಲಾಖೆ ಹಾಗೂ ಸರ್ಕಾರದ ಘನತೆಯನ್ನು ಎತ್ತಿಹಿಡಿಯಬೇಕು. ಒಂದು ವೇಳೆ ಸರ್ಕಾರದ ಗೌರವಕ್ಕೆ ಧಕ್ಕೆ ತರುವಂತಹ ಕೆಲಸ ಮಾಡಿದರೆ ಅದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶುಕ್ರವಾರ ನಡೆದ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಲಾಖೆಯ ಸಿಬ್ಬಂದಿಯನ್ನು ಎಚ್ಚರಿಸಿದ ಅವರು, “ಅಬಕಾರಿ ಇಲಾಖೆಯವರನ್ನು ಬೇರೆ ಇಲಾಖೆಗಳಿಗೆ ವರ್ಗಾವಣೆ ಮಾಡಲು ಬರುವುದಿಲ್ಲ ಎಂದು ಯಾರೂ ಭ್ರಮೆಯಲ್ಲ ಇರಬೇಡಿ. ಒಂದು ವೇಳೆ ಇಲಾಖೆಯಲ್ಲಿ ಬೇಜವಾಬ್ದಾರಿತನ ಕಂಡುಬಂದರೆ, ಅಂತವರನ್ನು ಬೇರೆಡೆಗೆ ವರ್ಗಾಯಿಸಲು ಅಗತ್ಯವಿರುವ ಕಾನೂನು ತಿದ್ದುಪಡಿಯನ್ನು ತರಲೂ ಸಹ ಸರ್ಕಾರ ಸಿದ್ಧವಿದೆ. ಆದ್ದರಿಂದ ಪ್ರತಿಯೊಬ್ಬರೂ ಅತ್ಯಂತ ಜಾಗರೂಕರಾಗಿ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು” ಎಂದು ಕಡಕ್ ಆಗಿ ತಿಳಿಸಿದರು. ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಯಾವುದೇ ಪ್ರಯತ್ನ ಅಥವಾ ವ್ಯಕ್ತಿಯನ್ನು ತಾವು ಸಹಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಗುರಿ ತಲುಪಲು ಸೂಚನೆ; ೫೭೪ ಹೊಸ ಸನ್ನದುಗಳ ಇ-ಹರಾಜಿಗೆ ನಿರ್ಧಾರ
ಸಭೆಯಲ್ಲಿ ಇಲಾಖೆಯ ಪ್ರಗತಿಯ ಕುರಿತು ಚರ್ಚಿಸಿದ ಡಿ.ಕೆ. ಶಿವಕುಮಾರ್ ಅವರು, ಅಬಕಾರಿ ಇಲಾಖೆಯಲ್ಲಿ ಹೊಸದಾಗಿ ಜಾರಿಗೆ ತರಲಾಗಿರುವ ಎಐಬಿ (AIB) ಪದ್ಧತಿಯಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ಉತ್ತಮ ಬೆಳವಣಿಗೆಯಾಗಿದೆ ಎಂದು ತೃಪ್ತಿ ವ್ಯಕ್ತಪಡಿಸಿದರು. ಇದರೊಂದಿಗೆ ಇಲಾಖೆಯ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಹೊಸದಾಗಿ ೫೭೪ ಸನ್ನದುಗಳನ್ನು (Licenses) ಇ-ಹರಾಜು ಪ್ರಕ್ರಿಯೆಯ ಮೂಲಕ ವಿಲೇವಾರಿ ಮಾಡಲು ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. ಇನ್ನು ಪರವಾನಗಿ ಹೊಂದಿರುವ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ, ಪರವಾನಗಿ ನವೀಕರಣದ (License Renewal) ಒಟ್ಟು ಮೊತ್ತವನ್ನು ಒಂದೇ ಬಾರಿಗೆ ಪಾವತಿಸುವ ಬದಲು ಎರಡು ಕಂತುಗಳಲ್ಲಿ ಪಾವತಿಸಲು ಅವಕಾಶ ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನೆರೆರಾಜ್ಯಗಳಲ್ಲಿ ಅಬಕಾರಿ ಇಲಾಖೆಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ ಮತ್ತು ಅಲ್ಲಿನ ಆದಾಯ ಸಂಗ್ರಹದ ಮಾದರಿಗಳೇನು ಎಂಬ ಸಂಪೂರ್ಣ ವರದಿಯನ್ನು ತಾವೂ ವೀಕ್ಷಿಸಿರುವುದಾಗಿ ತಿಳಿಸಿದ ಅವರು, ಕರ್ನಾಟಕದಲ್ಲಿ ಇಲಾಖೆಗೆ ನಿಗದಿಪಡಿಸಿರುವ ಆದಾಯದ ಗುರಿಯನ್ನು ತಲುಪಲು ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು. ಅಧಿಕಾರಿಗಳು ತಮ್ಮ ಘನತೆಯನ್ನು ಕಾಪಾಡಿಕೊಂಡರೆ ಇಲಾಖೆಯ ಇಮೇಜ್ ಹೆಚ್ಚುತ್ತದೆ, ಅದರಿಂದ ಸರ್ಕಾರದ ಮೇಲಿನ ಸಾರ್ವಜನಿಕರ ವಿಶ್ವಾಸ ವೃದ್ಧಿಯಾಗುತ್ತದೆ. ಹೀಗಾಗಿ ಎಲ್ಲರೂ ಶಿಸ್ತಿನಿಂದ ಕೆಲಸ ಮಾಡಬೇಕು, ಇಲ್ಲದಿದ್ದರೆ ಕಠಿಣ ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಅಂತಿಮ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ನಮ್ಮ ಮೆಟ್ರೋ ಸಂಚಾರ ಕ್ರಾಂತಿ: ನಾಲ್ಕು ಪ್ರಮುಖ ಮಾರ್ಗಗಳಿಗೆ ಬರಲಿವೆ ಹೊಸ ರೈಲುಗಳು
