ಬೆಂಗಳೂರು: ನಿರ್ಭೀತಿಯ ಪತ್ರಿಕಾ ವೃತ್ತಿ ಇಂದಿನ ಸಂದರ್ಭದಲ್ಲಿ ಅತ್ಯಂತ ಸವಾಲಿನ ಕೆಲಸವಾಗಿದ್ದು, ತತ್ವಬದ್ಧ ವೃತ್ತಿಪರತೆ ಇಂದಿನ ಅಗತ್ಯವಾಗಿದೆ. ಇದರಿಂದ ಆ ಸವಾಲನ್ನು ಗೆಲ್ಲಬಹುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಹೇಳಿದರು.
ಪತ್ರಕರ್ತರು ವೃತ್ತಿಯ ತತ್ವ, ನೈತಿಕತೆಯಿಂದ ಕೆಲಸ ಮಾಡಬೇಕು
ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಗಾಂಧಿ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ವೃತ್ತಿಯ ತತ್ವ, ನೈತಿಕತೆ ಮತ್ತು ಆತ್ಮಸಾಕ್ಷಿಗೆ ಅನುಗುಣವಾಗಿ ಕಾರ್ಯನಿರ್ವಹಿಸಿದರೆ ಸಮಾಜಕ್ಕೆ ಒಳಿತಾಗುತ್ತದೆ. ಫೇಕ್ ನ್ಯೂಸ್ನಿಂದ ಪತ್ರಿಕಾ ವೃತ್ತಿ ಹೊರಬರಬೇಕಿದೆ ಎಂದು ಅವರು ಹೇಳಿದರು.
“ನಾನು ಬೆಳಗ್ಗೆ ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಹೋಗಿದ್ದೆ. ಆದರೆ, ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಕೆಲವು ಟಿವಿ ವಾಹಿನಿಗಳು ಪ್ರಸಾರ ಮಾಡಿದ್ದವು. ಇದು ಸಂಪೂರ್ಣ ತಪ್ಪು ಸುದ್ದಿ,” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಮೇಕೆದಾಟು ಪಾದಯಾತ್ರೆಯ ವೇಳೆ ನಿತ್ರಾಣಗೊಂಡು ಕಾರ್ಯಕರ್ತರ ತಳ್ಳಾಟದಿಂದ ತೊಂದರೆಯಾಗಿದ್ದ ಘಟನೆಯನ್ನು “ಕುಡಿದು ನಡೆದುಕೊಂಡು ಬರುತ್ತಿದ್ದಾರೆ” ಎಂಬ ರೀತಿಯಲ್ಲಿ ಬಿಂಬಿಸಲಾಗಿತ್ತು. ಇದು ಜನರಿಗೆ ತಪ್ಪು ಸಂದೇಶ ನೀಡುವ ಉದ್ದೇಶಪೂರ್ವಕ ಪ್ರಯತ್ನವಾಗಿತ್ತು ಎಂದು ಅವರು ಟೀಕಿಸಿದರು.
ಸುಳ್ಳು ಸುದ್ದಿಗಳನ್ನು ಪ್ರಕಟಿಸಬೇಡಿ
“ನಾನು ತಪ್ಪು ಮಾಡಿದರೆ ಅದನ್ನು ಬಹಿರಂಗಪಡಿಸಿ. ಆದರೆ ಸುಳ್ಳು ಸುದ್ದಿಗಳನ್ನು ಪ್ರಕಟಿಸಬೇಡಿ, ಪ್ರಸಾರ ಮಾಡಬೇಡಿ. ಸುದ್ದಿ ಪ್ರಕಟವಾಗುವವರೆಗೆ ಅದು ಪತ್ರಕರ್ತರದ್ದಾಗಿರುತ್ತದೆ. ಪ್ರಕಟವಾದ ನಂತರ ಅದು ಸಮಾಜದ ಆಸ್ತಿಯಾಗುತ್ತದೆ. ಆದ್ದರಿಂದ ಪ್ರತಿಯೊಂದು ಸುದ್ದಿಯಲ್ಲೂ ಸತ್ಯ ಮತ್ತು ಪ್ರಾಮಾಣಿಕತೆ ಇರಬೇಕು,” ಎಂದು ಅವರು ಕಿವಿಮಾತು ಹೇಳಿದರು.
ಮಹಾತ್ಮ ಗಾಂಧಿ ಸೇರಿದಂತೆ ಅನೇಕ ಮಹನೀಯರು ಪತ್ರಕರ್ತರಾಗಿ ಪತ್ರಿಕಾ ವೃತ್ತಿಯ ಘನತೆಯನ್ನು ಹೆಚ್ಚಿಸಿದ್ದಾರೆ. ಆ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕೆಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಾರ್ತಾಭಾರತಿ ಸಂಪಾದಕ ಅಬುಸಾಲಂ ಪುತ್ತಿಗೆ ಪ್ರಧಾನ ಭಾಷಣ ಮಾಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಆರ್. ಪೂರ್ಣಿಮಾ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯಿಷಾ ಖಾನುಂ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಅನುಚೇತ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ: ಬಂಡಿಪುರ, ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಗ್ರೀನ್ ಸಿಗ್ನಲ್
