ರಾಮನಗರ: ಜಿಲ್ಲೆಯ ಮಾದಾಪಟ್ಟಣದ ಸಮೀಪವಿರುವ ಕಲ್ಲು ಕ್ವಾರಿಯೊಂದರಲ್ಲಿ ಸಂಭವಿಸಿದ ಭೀಕರ ಬಂಡೆ ಕುಸಿತದ ದುರಂತದಲ್ಲಿ ಏಳು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇನ್ನುಳಿದ ಕಾರ್ಮಿಕರನ್ನು ಬೆಂಗಳೂರಿನ ಆರ್.ಆರ್. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.
ವಿಧಾನಸೌಧದಲ್ಲಿ ಪ್ರಮುಖ ಸಚಿವ ಸಂಪುಟ ಸಭೆ ಮುಗಿಯುತ್ತಿದ್ದಂತೆಯೇ ನೇರವಾಗಿ ಆಸ್ಪತ್ರೆಗೆ ಧಾವಿಸಿದ ಮುಖ್ಯಮಂತ್ರಿಗಳು, ಗಾಯಾಳುಗಳಿಗೆ ಯಾವುದೇ ಲೋಪವಿಲ್ಲದೆ ಅತ್ಯಾಧುನಿಕ ಚಿಕಿತ್ಸೆ ಕಲ್ಪಿಸುವಂತೆ ವೈದ್ಯಕೀಯ ಸಿಬ್ಬಂದಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಸಿಎಂ ಭೇಟಿಯ ವೇಳೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (ಡಿಜಿ-ಐಜಿಪಿ) ಡಾ. ಎಂ.ಎ. ಸಲೀಂ ಕೂಡ ಉಪಸ್ಥಿತರಿದ್ದರು.
ಘಟನಾ ಸ್ಥಳಕ್ಕೆ ಎಡಿಜಿಪಿ ಭೇಟಿ; ಮಾಲೀಕರ ಬೇಜವಾಬ್ದಾರಿತನಕ್ಕೆ ಕೇಸ್ ಈ ಭೀಕರ ದುರಂತದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಅವರು ರಾಮನಗರದ ಕ್ವಾರಿ ಪ್ರದೇಶಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಐಜಿಪಿ ಗಿರೀಶ್ ಹಾಗೂ ಎಎಸ್ಪಿ ರಾಮಚಂದ್ರಪ್ಪ ಸೇರಿದಂತೆ ಸ್ಥಳೀಯ ಉನ್ನತಾಧಿಕಾರಿಗಳಿಂದ ಘಟನೆಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಪಡೆದುಕೊಂಡರು. ಬೆಳಗಿನ ಜಾವ ಸುಮಾರು 7 ಗಂಟೆಯ ಅವಧಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೇಲ್ನೋಟಕ್ಕೆ ಇದು ಕ್ವಾರಿ ಮಾಲೀಕರ ಬೇಜವಾಬ್ದಾರಿತನ ಮತ್ತು ನಿರ್ಲಕ್ಷ್ಯದಿಂದ ನಡೆದಿರುವುದು ಸ್ಪಷ್ಟವಾಗಿದ್ದು, ಪ್ರಾಣಾಪಾಯದಿಂದ ಪಾರಾದ ಕಾರ್ಮಿಕರೊಬ್ಬರು ನೀಡಿದ ದೂರಿನ ಮೇರೆಗೆ ಇಬ್ಬರು ಮಾಲೀಕರ ವಿರುದ್ಧ ಎಫ್ಐಆರ್ (FIR) ದಾಖಲಿಸಲಾಗಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಈ ಕ್ವಾರಿಯ ಪರವಾನಗಿಯ ಕಾನೂನುಬದ್ಧತೆ ಬಗ್ಗೆ ವರದಿ ಕೇಳಲಾಗಿದೆ ಎಂದು ಎಡಿಜಿಪಿ ಹಿತೇಂದ್ರ ತಿಳಿಸಿದ್ದಾರೆ.
ತಲೆಮರೆಸಿಕೊಂಡ ಮಾಲೀಕರಿಗೆ ಪೊಲೀಸರ ವಾರ್ನಿಂಗ್ ಅಪಘಾತ ಸಂಭವಿಸಿದ ತಕ್ಷಣವೇ ಕ್ವಾರಿಯ ಮಾಲೀಕರು ಸ್ಥಳದಿಂದ ಕಾಲ್ಕಿತ್ತಿದ್ದು, ಸದ್ಯ ತಲೆಮರೆಸಿಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಗಳು, “ಆರೋಪಿಗಳು ಸದ್ಯಕ್ಕೆ ತಲೆಮರೆಸಿಕೊಂಡಿರುವುದು ನಿಜ. ಆದರೆ ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಲೆಮರೆಸಿಕೊಂಡಿರುವ ಮಾಲೀಕರ ಪತ್ತೆಗಾಗಿ ಈಗಾಗಲೇ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಅತಿ ಶೀಘ್ರದಲ್ಲೇ ಅವರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು,” ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: 10 ಹೊಸ ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ: ಸಚಿವ ಪ್ರಿಯಾಂಕ್ ಖರ್ಗೆ
