ಬೆಂಗಳೂರು: ನಾವು ಎರಡು ಕಣ್ಣಲ್ಲಿ ನೂರು ಜನರನ್ನು ನೋಡಿದರೆ, ನೂರು ಜನರ ಇನ್ನೂರು ಕಣ್ಣುಗಳು ನಮ್ಮನ್ನು ಗಮನಿಸುತ್ತಿರುತ್ತವೆ, ಹಾಗಾಗಿ ಎಚ್ಚರದಲ್ಲಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಸಲಹೆ ನೀಡಿದ್ದಾರೆ.
ಅಧಿಕಾರಿಗಳು ಮೈ ಮರೆಯಬಾರದು
ಸುವರ್ಣಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಆರಂಭದಲ್ಲಿಯೇ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನ ಕೊಟ್ಟಿದ್ದು, ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನಾದೇಶಕ್ಕಾಗಿ ಜನರ ಬಳಿಕೆ ಹೋಗಬೇಕು. ಅಧಿಕಾರಿಗಳಿಗೆ ಇದರ ಅಗತ್ಯ ಇರುವುದಿಲ್ಲ. ಹಾಗಂಥಾ ಅಧಿಕಾರಿಗಳು ಮೈ ಮರೆತರೆ, ಕರ್ತವ್ಯ ಮರೆತರೆ ಅದು ಜನತೆಗೆ ಬಗೆಯುವ ದ್ರೋಹವಾಗುತ್ತದೆ. ಅಧಿಕಾರಿ ವರ್ಗ ತಮ್ಮ ಹೊಣೆಗಾರಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಿದರೆ ಸರ್ಕಾರದ ಮೇಲೆ ಜನತೆ ಇಟ್ಟಿರುವ ನಿರೀಕ್ಷೆ ಈಡೇರಿದಂತಾಗುತ್ತದೆ ಎಂದಿದ್ದಾರೆ.
ಸಭೆಯ ನಡುವೆ ಯಾವುದೇ ಅಧಿಕಾರಿ ಮೊಬೈಲ್ ನಲ್ಲಿ ಮಾತಾಡುವುದು ಕಂಡು ಬಂದರೆ ಸಂಜೆ ಮೀಟಿಂಗ್ ಮುಗಿಯುವ ವೇಳೆಗೆ ನಿಮ್ಮ ಅಮಾನತು ಆದೇಶ ಬರುತ್ತದೆ. ಈ ಎಚ್ಚರಿಕೆಯನ್ನು ಗಮನದಲ್ಲಿ ಇಟ್ಟುಕೊಂಡು ಸಭೆಯಲ್ಲಿ ಭಾಗವಹಿಸಿ ಎಂದಿರುವ ಅವರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲೇ ನೆಲೆಸಬೇಕು. ಹಾಗಾದಾಗ ಮಾತ್ರ ನೀವು ಜನರ ಕೈಗೆ ಸಿಗಲು, ಅವರಿಗೆ ಸ್ಪಂದಿಸಲು ನೆರವಾಗುತ್ತದೆ. ಸುಖಾ ಸುಮ್ಮನೆ ಜನರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸುವುದನ್ನು ನಾನು ಸಹಿಸುವುದಿಲ್ಲ. ನಿಮ್ಮ ಹಂತದಲ್ಲೇ ಕೆಲಸ ಸರಾಗವಾಗಿ ಆದರೆ ಸಣ್ಣ ಪುಟ್ಟ ಕೆಲಸಗಳಿಗೂ ಜನತೆ ಕಚೇರಿಗೆ ಅಲೆದಾಡುವುದು ತಪ್ಪುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳ ಬಳಿ ತಮ್ಮ ಅಧೀನ ಅಧಿಕಾರಿಗಳ ಮಾಹಿತಿ ಅಂಗೈ ತುದಿಯಲ್ಲಿ ಇರಬೇಕು. ಯಾವ ಯಾವ ಅಧಿಕಾರಿ ಫೀಲ್ಡ್ ವರ್ಕ್ಗೆ ಹೋಗಿದ್ದಾರೆ, ಯಾವ ಪ್ರದೇಶಕ್ಕೆ ಹೋಗಿದ್ದಾರೆ, ಜನರ ಬಳಿಗೆ ಹೋಗಿ ಯಾವ ಸಮಸ್ಯೆ ಬಗೆಹರಿಸಿದ್ದಾರೆ ಎನ್ನುವ ನಿತ್ಯದ ಅಪ್ಡೇಟ್ ನಿಮ್ಮ ಬಳಿ ಇರಬೇಕು. ಈ ರೀತಿಯ ಒಂದು ರಿಜಿಸ್ಟರ್ ನಿರ್ವಹಣೆ ಮಾಡುವುದು ಜಿಲ್ಲಾ ಮಟ್ಟದ ಅಧಿಕಾರಿಗಳ ಜವಾಬ್ದಾರಿ
ನಮ್ಮ ಸರ್ಕಾರ ಕ್ರಾಂತಿಕಾರಕ ರೀತಿಯಲ್ಲಿ ಜನರ ಸಮಸ್ಯೆ ಬಗೆಹರಿಸಲು “ಪ್ರಜಾಸೇವಾ ಇಲಾಖೆ”ಯನ್ನು ಸ್ಥಾಪಿಸಿದ್ದೇವೆ. ಶಾಸಕರು, ಜಿಲ್ಲಾ ಮಂತ್ರಿಗಳು, ಅಧಿಕಾರಿಗಳು ನಿಯಮಿತವಾಗಿ ಜನರ ಬಳಿಗೆ ಹೋಗಬೇಕು. ನಾನು ನಿರಂತರವಾಗಿ ಜನ ಸ್ಪಂದನೆ ಕಾರ್ಯಕ್ರಮಗಳನ್ನು ನಡೆಸುತ್ತೇನೆ. ನೀವೂ ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಪ್ರಜಾಸೇವೆ ಇಲಾಖೆಯ ಗೈಡ್ ಲೈನ್ಸ್ಗಳನ್ನು ಸರಿಯಾಗಿ ಜಾರಿ ಮಾಡಬೇಕು. ಈ ವಿಚಾರದಲ್ಲಿ ನಾನು ಉದಾಸೀನ, ದೌರ್ಜನ್ಯ ಸಹಿಸಲ್ಲ. ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕೊಡಲು ಸಾಧ್ಯವಿರುವುದನ್ನು ತಪ್ಪದೇ ನೀಡಬೇಕು. ಜನ ಜಿಲ್ಲಾ ಕೇಂದ್ರ, ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸಿ
ಅವೈಜ್ಞಾನಿಕವಾಗಿ ನಗರಗಳು, ಪಟ್ಟಣಗಳು ಬೆಳೆಯುವುದನ್ನು ತಪ್ಪಿಸಿ ಶಿಸ್ತುಬದ್ದವಾದ, ಯೋಜನಾಬದ್ದವಾದ ನಗರಗಳು, ಪಟ್ಟಣಗಳ ಬೆಳವಣಿಗೆಗೆ ಪೂರಕವಾಗಿ ನಾವು ಕೆಲವು ಬದಲಾವಣೆಗಳನ್ನು ತರುತ್ತೇವೆ. ಕ್ಯಾಬಿನೆಟ್ನಲ್ಲಿ ತೆಗೆದುಕೊಳ್ಳುವ ನಮ್ಮ ತೀರ್ಮಾನಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡು ಜಾರಿಗೆ ತನ್ನಿ
ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ, ಪಾಲಿಕೆಗಳ ವ್ಯಾಪ್ತಿಯಲ್ಲಿ ಯೋಜನಾಬದ್ದ ಬೆಳವಣಿಗೆ ಆಗಬೇಕು. ಅನುಮತಿ ಪಡೆಯದೆ ಯಾರೂ ಬಡವಾವಣೆಗಳನ್ನು ನಿರ್ಮಿಸಲು ಅವಕಾಶ ಇರಬಾರದು
ಇಡೀ ದೇಶದಲ್ಲಿ ಕ್ರಾಂತಿಕಾರವಾಗಿ ಕಂದಾಯ ಇಲಾಖೆಯಲ್ಲಿ ಬದಲಾವಣೆ ತಂದಿದ್ದೇವೆ. ಯಾರೂ ಕೂಡ ಒಂದು ಪೈಸೆ ಖರ್ಚಿಲ್ಲದಂತೆ ಅವರ ಆಸ್ತಿಗೆ ಇ-ಖಾತೆ ಅವರ ಮನೆ ಬಾಗಿಲಿಗೆ ತಲುಪಿಸುತ್ತಿದ್ದೇವೆ. ಬೆಂಗಳೂರಿನ ಬಳಿಕ ಇಡೀ ರಾಜ್ಯಕ್ಕೆ ಇದು ವಿಸ್ತರಣೆ ಆಗುತ್ತಿದೆ. ನಮ್ಮ ಸರ್ಕಾರದ ಈ ಕ್ರಾಂತಿಕಾರಕ ಯೋಜನೆ ಅಷ್ಟೇ ಪರಿಣಾಮಕಾರಿಯಾಗಿ ತಳಮಟ್ಟದಲ್ಲಿ ಜಾರಿ ಆಗಬೇಕು
ಶಿಕ್ಷಣ ಇಲಾಖೆಯಲ್ಲೂ ಇದೇ ರೀತಿಯ ಮತ್ತೊಂದು ಕ್ರಾಂತಿಕಾರಿ ತೀರ್ಮಾನ ತೆಗೆದುಕೊಳ್ಳುತ್ತಿದ್ದೇವೆ. ಸಿಎಸ್ಆರ್ ಶಾಲೆಗಳನ್ನು ನಾವು ಆರಂಭಿಸುತ್ತಿದ್ದೇವೆ. ಕೆಪಿಎಸ್ ಶಾಲೆಗಳ ಮಾದರಿಯಲ್ಲಿ ಸಿಎಸ್ಆರ್ ಶಾಲೆಗಳನ್ನು ಅಭಿವೃದ್ಧಿ ಪಡಿಸಲಿದ್ದೇವೆ. ಗ್ರಾಮಾಂತರ ಭಾಗದಲ್ಲೂ ಉತ್ತಮ ಗುಣಮಟ್ಟದ ಶಾಲೆಗಳು ಅವರ ಏರಿಯಾದಲ್ಲೇ ಇರಬೇಕು ಎನ್ನುವುದು ನನ್ನ ಆಲೋಚನೆಯಾಗಿದೆ. ಇದಕ್ಕಾಗಿ ಎಲ್ಲಾ ಉದ್ಯಮಿಗಳನ್ನು ನಾನು ಕರೆಸಿ ಮಾತುಕತೆ ನಡೆಸುತ್ತಿದ್ದೇನೆ
ಪ್ರಾಥಮಿಕ ಹಂತದಿಂದಲೇ ನನ್ನ ಕ್ಷೇತ್ರದಲ್ಲಿ ನಾನು ಈ ಪ್ರಯೋಗ ಮಾಡಿ ಯಶಸ್ವಿ ಆಗಿದೆ. 20 ಶಾಲೆಗಳು ಅಚ್ಚುಕಟ್ಟಾಗಿ ನಡೆಯುತ್ತಿವೆ. ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಇದು ಪರಿಣಾಮಕಾರಿಯಾಗಿ ೧೦-೨೦ ಶಾಲೆಗಳು ಸ್ಥಾಫನೆ ಆಗಬೇಕು ಎನ್ನುವುದು ನನ್ನ ಗುರಿಯಾಗಿದೆ. ನೀವುಗಳು ನನ್ನ ಗುರಿಗಳ ಜೊತೆಗೆ ಹೆಜ್ಜೆ ಹಾಕಿ
ಎಸ್ಐಆರ್ ವಿಚಾರದಲ್ಲಿ ನಾವು ರಾಜಕಾರಣ ಮಾಡಬಾರದು
ರಾಜ್ಯ ಚುನಾವಣಾಧಿಕಾರಿಗಳು ಎಲ್ಲವನ್ನೂ ಸ್ಪಷ್ಟವಾಗಿ ತಿಳಿಸಿದ್ದಾರೆ. ಭಾರತೀಯ ಚುನಾವಣಾ ಆಯೋಗದ ಕಾರ್ಯಯೋಜನೆಗೆ ನಾವು ಪೂರಕವಾಗಿ ನೆರವು ನೀಡುತ್ತಿದ್ದೇವೆ. ಪ್ರತಿಯೊಬ್ಬರ ಮತದಾನದ ಹಕ್ಕು ಉಳಿಯಬೇಕು. ಇದಕ್ಕೆ ಪೂರಕವಾಗಿ ಯಾರ್ಯಾರಿಗೆ ಯಾವ ಯಾವ ದಾಖಲೆಗಳ ಅಗತ್ಯವಿದೆಯೋ ಅದನ್ನೆಲ್ಲಾ ನಮ್ಮ ಸರ್ಕಾರ ಒದಗಿಸಬೇಕು. ಎಸ್ಐಆರ್ ವಿಚಾರದಲ್ಲಿ ನಾವು ರಾಜಕಾರಣ ಮಾಡಬಾರದು. ಅಧಿಕಾರಿಗಳು ಗಮನಿಸಬೇಕು. ಮುಖ್ಯವಾಗಿ ಪ್ರತೀ ಮನೆಗೆ ಮೂರು ಬಾರಿ ಬಿಎಲ್ಒಗಳು ಭೇಟಿ ನೀಡಿ ಅರ್ಜಿಯನ್ನು ಒದಗಿಸಬೇಕು
ಯಾರ ಮತದಾನದ ಹಕ್ಕು ಉಳಿಯುತ್ತದೋ ಅವರಿಗೆ ಸರ್ಕಾರದ ಸವಲತ್ತುಗಳು ಸಿಗುತ್ತವೆ. ಮತದಾರನೇ ಅಲ್ಲದವನಿಗೆ ಸವಲತ್ತುಗಳು ಸಿಗುವುದಿಲ್ಲ. ಆದ್ದರಿಂದ ನಾವು ಹೆಲ್ಪ್ ಡೆಸ್ಕ್ಗಳನ್ನು ಪ್ರತೀ ವಾರ್ಡ್ಗಳು ಮತ್ತು ಏರಿಯಾಗಳಲ್ಲಿ ತೆರೆಯುತ್ತಿದ್ದೇವೆ. ಇದರ ಸದುಪಯೋಗ ಪಡಿಸಿಕೊಳ್ಳಿ. ಒಬ್ಬೇ ಒಬ್ಬ ಮತದಾರನ ಹಕ್ಕು ಕಳೆದುಹೋಗಬಾರದು. ಇದು ನಮ್ಮ ಸರ್ಕಾರದ ಉದ್ದೇಶ
ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನ ಹಲವು ಯೋಜನೆಗಳನ್ನು ಘೋಷಿಸಿದ್ದೇನೆ. ಹಾಗೆಯೇ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯನ್ನೂ ಘೋಷಿಸಿದ್ದೇನೆ. ಈ ಎಲ್ಲಾ ಘೋಷಣೆಗಳೂ ಕಾರ್ಯಕ್ರಮಗಳಾಗಿ ಸಂಬಂಧಪಟ್ಟ ಫಲಾನುಭವಿಗಳಿಗೆ ತಲುಪಬೇಕು. ಇದಕ್ಕಾಗಿ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು
*ಖಾಸಗಿ ಉದ್ಯೋಗ ವಿನಿಮಯ ಕೇಂದ್ರವನ್ನೂ ತೆರೆಯಲು ನಾವು ತೀರ್ಮಾನಿಸಿದ್ದೇವೆ. ಇದಕ್ಕೆ “ಯುವ ಉದ್ಯೋಗ ಸೇತು” ಕಾರ್ಯಕ್ರಮ ಜಾರಿ ಮಾಡುತ್ತಿದ್ದೇವೆ. ಖಾಸಗಿ ಕ್ಷೇತ್ರದ ಉದ್ಯೋಗಗಳ ಬಗ್ಗೆಯೂ ಮಾಹಿತಿ ವಿದ್ಯಾರ್ಥಿ ಯುವ ಜನರಿಗೆ ಸಿಗಲಿದೆ”
ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ನಾಡಗೀತೆಯಲ್ಲಿರುವ ಆಶಯಗಳು ಮತ್ತು ಸಂವಿಧಾನಬದ್ದ ಮೌಲ್ಯಗಳು ಪ್ರತಿಯೊಬ್ಬರ ಮನೆ-ಮನ ತಲುಪಲು ಪೂರಕವಾಗಿ ಸೌಹಾರ್ಧಯುತ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ರಾಜ್ಯದಲ್ಲಿ ಹತ್ತು ಸಾವಿರ “ಭಾರತ್ ಜೋಡೋ ಯುವ ಸಂಘ”ಗಳನ್ನು ತೆರೆಯುತ್ತಿದ್ದೇವೆ. ಪ್ರತೀ ಸಂಘಕ್ಕೆ ಹತ್ತು ಲಕ್ಷ ರೂಪಾಯಿ ಅನುದಾನ ಕೊಡುತ್ತಿದ್ದೇವೆ”
ರಾಜ್ಯದಾದ್ಯಂತ ಕಂದಾಯ ಇಲಾಖೆ ಭೂಮಿ ಎಲ್ಲೆಲ್ಲಿದೆಯೋ ಅದೆಲ್ಲದರ ಆಡಿಟಿಂಗ್ ಆಗಲಿದೆ. ನಿವೇಶನ ರಹಿತ ಎಲ್ಲಾ ಬಡವರಿಗೂ ನಿವೇಶನ ಕೊಡುವುದನ್ನು ಕಡ್ಡಾಯವಾಗಿ ಜಾರಿಯಾಗಬೇಕು. ಇದಕ್ಕೆ ಒಂದು ಸ್ಪಷ್ಟವಾದ ಯೋಜನೆ ರೂಪಿಸುತ್ತಿದ್ದೇವೆ. ನೀವೆಲ್ಲರೂ ಕಂದಾಯ ಭೂಮಿ ಎಲ್ಲೆಲ್ಲಿದೆಯೋ ಅವುಗಳ ಬಗ್ಗೆ ಸ್ಪಷ್ಟ ದಾಖಲೆ, ವಿವರಗಳನ್ನು ಸಂಗ್ರಹಿಸಿ ಕಳುಹಿಸಬೇಕು
ಇದನ್ನೂ ಓದಿ: ವೀಕೆಂಡ್ನಿಂದ ರಾಜ್ಯಾದ್ಯಂತ ಮಳೆರಾಯ ಮಂಕು: ಜುಲೈ 11ರಿಂದ ಒಣಹವೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!
