ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದಿದೆ ಎನ್ನಲಾದ ಪೊಲೀಸ್ ದೌರ್ಜನ್ಯವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ (Supreme Court) ಸ್ಪಷ್ಟವಾಗಿ ನಿರಾಕರಿಸಿದೆ. “ನಿಮ್ಮ ಸಮಯ ಮತ್ತು ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ” ಎಂದು ಶೀರ್ಷಪೀಠವು ಅರ್ಜಿದಾರರ ಪರ ವಕೀಲರಿಗೆ ನೇರವಾಗಿ ಹೇಳಿದೆ.
ಇತ್ತೀಚೆಗೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನಡೆಸಿದ ಆನ್ಲೈನ್ ಕರೆಗೆ ಓಗೊಟ್ಟು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ಮತ್ತು ನಾಗರಿಕರು ದೆಹಲಿಯ ಬೀದಿಗಿಳಿದು ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಪೊಲೀಸರ ಈ ಕ್ರಮವನ್ನು ಖಂಡಿಸಿ, ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಮತ್ತು ಸ್ವತಂತ್ರ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಮನವಿ ಮಾಡಲಾಗಿತ್ತು. ಆದರೆ, ನ್ಯಾಯಮೂರ್ತಿ ಸೂರ್ಯ ಕಾಂತ್ ಅವರಿದ್ದ ಪೀಠವು ಈ ಕುರಿತು ಯಾವುದೇ ವಿಡಿಯೋಗಳನ್ನು ನೋಡಲು ನಾವು ಬಯಸುವುದಿಲ್ಲ ಎಂದು ಅರ್ಜಿಯನ್ನು ತಳ್ಳಿಹಾಕಿದೆ.
ಇತ್ತ ದೆಹಲಿ ಹೈಕೋರ್ಟ್ ಕೂಡ ಈ ವಿಚಾರದಲ್ಲಿ ಪೊಲೀಸರ ಅತಿಯಾದ ಬಲಪ್ರಯೋಗವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ಪೀಠವು “ನ್ಯಾಯಾಲಯವನ್ನು ಈ ಎಲ್ಲ ವಿಚಾರಗಳಿಗೆ ಎಳೆದುತರಬೇಡಿ” ಎಂದು ಅರ್ಜಿದಾರರಿಗೆ ಎಚ್ಚರಿಸಿದೆ.
ಜೂನ್ 28 ರಿಂದ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಹಾಗೂ ಅನೇಕ ವಿದ್ಯಾರ್ಥಿಗಳು ಜಂತರ್ ಮಂತರ್ನಲ್ಲಿ ನೀಟ್ ಪರೀಕ್ಷೆ ಸೋರಿಕೆ ಮತ್ತು ಶಿಕ್ಷಣ ವ್ಯವಸ್ಥೆಯ ಅಕ್ರಮಗಳ ವಿರುದ್ಧ ಸುದೀರ್ಘ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಜುಲೈ 17 ರವರೆಗೆ ಶಾಂತಿಯುತವಾಗಿದ್ದ ಈ ಪ್ರತಿಭಟನಾ ಸ್ಥಳಕ್ಕೆ ಜುಲೈ 18 ರಂದು ಪ್ರವೇಶಿಸಿದ ಪೊಲೀಸರು, ಬಲವಂತವಾಗಿ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿ, ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲದೆ ಪ್ರತಿಭಟನಾಕಾರರನ್ನು ಚದುರಿಸಲು ಅತಿಯಾದ ಬಲಪ್ರಯೋಗ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಪ್ರಜಾಸತ್ತಾತ್ಮಕವಾಗಿ ಶಾಂತಿಯುತ ಪ್ರತಿಭಟನೆ ನಡೆಸುವ ನಾಗರಿಕರ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಘಟನೆಯ ಕುರಿತು ದೆಹಲಿ ಪೊಲೀಸ್ ಕಮಿಷನರ್ ಅಥವಾ ಸೂಕ್ತ ಪ್ರಾಧಿಕಾರದಿಂದ ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಇದನ್ನೂ ಓದಿ: ವಿಪಕ್ಷಗಳ ಪ್ರತಿಭಟನೆಯ ನಡುವೆಯೇ ಪ್ರಧಾನಿ ಮೋದಿ ಭೇಟಿಯಾದ ಶರದ್ ಪವಾರ್: ಕುತೂಹಲ ಮೂಡಿಸಿದ ರಾಜಕೀಯ ನಡೆ
