ಬೆಂಗಳೂರು: . ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡ ತಕ್ಷಣವೇ ಎನ್.ಚಲುವರಾಯಸ್ವಾಮಿ ಅವರು ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು (Mekedatu) ಕುಡಿಯುವ ನೀರಿನ ಯೋಜನೆ ಕುರಿತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಯೋಜನೆಯ ಪ್ರಸ್ತುತ ಸ್ಥಿತಿಗತಿ, ಎದುರಾಗಿರುವ ಸವಾಲುಗಳು ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು.
ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಭವಿಷ್ಯದಲ್ಲಿ ಸಮರ್ಪಕ ಹಾಗೂ ಶಾಶ್ವತ ಕುಡಿಯುವ ನೀರು ಒದಗಿಸುವ ದೃಷ್ಟಿಯಿಂದ ಮೇಕೆದಾಟು ಯೋಜನೆ ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಗೆ ಸಂಬಂಧಿಸಿದ ಯಾವುದೇ ವಿಷಯದಲ್ಲಿ ವಿಳಂಬವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಯೋಜನೆಯ ವಿಸ್ತೃತ ಯೋಜನಾ ವರದಿ (DPR), ಕೇಂದ್ರ ಸರ್ಕಾರ ಹಾಗೂ ಸಂಬಂಧಿಸಿದ ಪ್ರಾಧಿಕಾರಗಳಿಂದ ಅಗತ್ಯ ಅನುಮತಿಗಳು, ಪರಿಸರ ಮತ್ತು ಅರಣ್ಯ ಸಂಬಂಧಿತ ವಿಷಯಗಳು, ಭೂಸ್ವಾಧೀನ, ಪುನರ್ವಸತಿ, ಯೋಜನೆಯ ತಾಂತ್ರಿಕ ಅಂಶಗಳು ಹಾಗೂ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಿಕೊಂಡು ಯೋಜನೆಯನ್ನು ಮುಂದುವರಿಸುವ ಕಾರ್ಯತಂತ್ರ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕರ್ನಾಟಕದ ಹಿತಾಸಕ್ತಿಗೆ ಯಾವುದೇ ರಾಜಿ ಇಲ್ಲ:-
ಮೇಕೆದಾಟು ಯೋಜನೆ ಕೇವಲ ಒಂದು ನೀರಾವರಿ ಯೋಜನೆಯಲ್ಲ; ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರ ಪ್ರದೇಶಗಳ ಕುಡಿಯುವ ನೀರಿನ ಭವಿಷ್ಯಕ್ಕೆ ಸಂಬಂಧಿಸಿದ ಯೋಜನೆಯಾಗಿದೆ. ಆದ್ದರಿಂದ ಯೋಜನೆಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನು ಕಾನೂನುಬದ್ಧವಾಗಿ ಹಾಗೂ ವೈಜ್ಞಾನಿಕವಾಗಿ ಮುಂದುವರಿಸಿಕೊಂಡು ಹೋಗಬೇಕು ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
“ಕರ್ನಾಟಕದ ಜನರ ಕುಡಿಯುವ ನೀರಿನ ಹಕ್ಕು ಮತ್ತು ರಾಜ್ಯದ ಹಿತಾಸಕ್ತಿಯನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸಾಧ್ಯವಿಲ್ಲ. ಯೋಜನೆಯ ಪ್ರತಿಯೊಂದು ಹಂತದಲ್ಲೂ ಕಾನೂನು ಮತ್ತು ತಾಂತ್ರಿಕ ನಿಯಮಗಳನ್ನು ಪಾಲಿಸಿಕೊಂಡು, ಅಗತ್ಯ ಅನುಮತಿಗಳನ್ನು ಪಡೆಯುವ ಪ್ರಕ್ರಿಯೆಗೆ ವೇಗ ನೀಡಬೇಕು” ಎಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಧಿಕಾರಿಗಳಿಂದ ಸಮಗ್ರ ಪ್ರಸ್ತಾವನೆ:-
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಇದುವರೆಗೆ ಕೈಗೊಂಡಿರುವ ಕ್ರಮಗಳು, ಬಾಕಿ ಇರುವ ಅನುಮತಿಗಳು ಹಾಗೂ ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಪ್ರಸ್ತಾವನೆಯನ್ನು ಸಿದ್ಧಪಡಿಸಿ ನೀಡುವಂತೆ ಸಚಿವರು ಸೂಚಿಸಿದರು.
ಯೋಜನೆಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ, ಅಗತ್ಯ ದಾಖಲೆಗಳು ಮತ್ತು ತಾಂತ್ರಿಕ ಮಾಹಿತಿಗಳನ್ನು ಸಿದ್ಧಪಡಿಸಬೇಕು. ಕೇಂದ್ರ ಸರ್ಕಾರದ ಸಂಬಂಧಿತ ಇಲಾಖೆಗಳು ಹಾಗೂ ಪ್ರಾಧಿಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕರ್ನಾಟಕದ ನಿಲುವನ್ನು ಪರಿಣಾಮಕಾರಿಯಾಗಿ ಮಂಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಕುಡಿಯುವ ನೀರಿಗೆ ಮೊದಲ ಆದ್ಯತೆ:-
ಬೆಂಗಳೂರು ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭವಿಷ್ಯದ ಕುಡಿಯುವ ನೀರಿನ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಈಗಿನಿಂದಲೇ ದೀರ್ಘಾವಧಿಯ ಯೋಜನೆಗಳನ್ನು ರೂಪಿಸಬೇಕಾಗಿದೆ. ಮೇಕೆದಾಟು ಯೋಜನೆಯಂತಹ ಮಹತ್ವದ ಯೋಜನೆಗಳನ್ನು ಕೇವಲ ಇಂದಿನ ಅಗತ್ಯಕ್ಕಾಗಿ ಮಾತ್ರವಲ್ಲದೆ ಮುಂದಿನ ಹಲವು ದಶಕಗಳ ನೀರಿನ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಪರಿಗಣಿಸಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು.
“ನೀರು ಜನರ ಮೂಲಭೂತ ಅಗತ್ಯ. ಕುಡಿಯುವ ನೀರಿನ ವಿಚಾರದಲ್ಲಿ ಯಾವುದೇ ರಾಜಕೀಯ ಭಿನ್ನಾಭಿಪ್ರಾಯಗಳಿಗಿಂತ ಜನರ ಹಿತವೇ ಮುಖ್ಯ. ಮೇಕೆದಾಟು ಯೋಜನೆಯ ವಿಚಾರದಲ್ಲಿ ರಾಜ್ಯದ ಕಾನೂನುಬದ್ಧ ಹಕ್ಕುಗಳನ್ನು ರಕ್ಷಿಸಿಕೊಂಡು, ಯೋಜನೆ ಮುಂದುವರಿಸಲು ಸರ್ಕಾರ ಅಗತ್ಯ ಎಲ್ಲ ಪ್ರಯತ್ನಗಳನ್ನು ಮಾಡಲಿದೆ” ಎಂದು ಎನ್.ಚಲುವರಾಯಸ್ವಾಮಿ ಹೇಳಿದರು.
ತ್ವರಿತ ಕಾರ್ಯಯೋಜನೆಗೆ ಸೂಚನೆ:-
ಸಭೆಯ ಅಂತ್ಯದಲ್ಲಿ ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಸ್ತುತ ಹಂತ, ಬಾಕಿ ಇರುವ ಪ್ರಮುಖ ವಿಷಯಗಳು ಹಾಗೂ ಅವುಗಳ ಪರಿಹಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸ್ಪಷ್ಟವಾದ ಕಾಲಮಿತಿಯ ಕಾರ್ಯಯೋಜನೆ ರೂಪಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಯೋಜನೆಯ ಎಲ್ಲಾ ತಾಂತ್ರಿಕ ಮತ್ತು ಆಡಳಿತಾತ್ಮಕ ಅಂಶಗಳನ್ನು ಪರಿಶೀಲಿಸಿ, ಮುಂದಿನ ಹಂತದ ಕ್ರಮಗಳ ಕುರಿತು ಶೀಘ್ರವಾಗಿ ವರದಿ ಸಲ್ಲಿಸಬೇಕು ಎಂದು ಅವರು ನಿರ್ದೇಶನ ನೀಡಿದರು.
ಮೇಕೆದಾಟು ಯೋಜನೆಯನ್ನು ರಾಜ್ಯದ ಕುಡಿಯುವ ನೀರಿನ ಭದ್ರತೆಯ ಪ್ರಮುಖ ಯೋಜನೆಯಾಗಿ ಪರಿಗಣಿಸಿ, ಕಾನೂನುಬದ್ಧ ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳಿಗೆ ವೇಗ ನೀಡುವ ಮೂಲಕ ಯೋಜನೆಗೆ ಹೊಸ ಚೈತನ್ಯ ನೀಡುವ ನಿಟ್ಟಿನಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಈ ಸಭೆ ಮಹತ್ವ ಪಡೆದಿದೆ.
ಸಭೆಯಲ್ಲಿ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ ಸೇರಿದಂತೆ ನೀರಾವರಿ ಇಲಾಖೆಯ ಇತರೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು..
ಇದನ್ನೂ ಓದಿ: ಬೆಂಗಳೂರಿನ ಖ್ಯಾತ ರೆಸ್ಟೋರೆಂಟ್ಗಳ ಅಸಲಿ ಬಣ್ಣ ಬಯಲು: ಕಳಪೆ ಸ್ವಚ್ಛತೆ, ಅವಧಿ ಮುಗಿದ ಎಣ್ಣೆ ಪತ್ತೆ
