TOP NEWS

Krishna Byre Gowda: ಶೇ. 30 ರಷ್ಟು ಸಿಬ್ಬಂದಿ ಕೆಲಸಕ್ಕೆ ಬಂದಿಲ್ಲ, ಕಸ ಬಿದ್ದು ಏರಿಯಾ ಗಬ್ಬೆದ್ದು ನಾರುತ್ತಿದೆ: ಸಚಿವ ಕೃಷ್ಣ ಬೈರೇಗೌಡ ಆಕ್ರೋಶ!

Should Unperforming Staff Be Permanent Minister Krishna Byre Gowda Slams Sanitation Workers

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ನೈರ್ಮಲ್ಯ ಸಮಸ್ಯೆ ಹಾಗೂ ಸಾರ್ವಜನಿಕರ ಸಾಲು ಸಾಲು ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ದಿಢೀರ್ ಪರಿಶೀಲನೆ ನಡೆಸಿ, ಕಾರ್ಯಕ್ಷಮತೆ ತೋರದ ಸ್ವಚ್ಛತಾ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ನಗರದ ವಿವಿಧ ಬಡಾವಣೆಗಳಿಗೆ ಮೂಲಸೌಕರ್ಯ ಮತ್ತು ಸ್ವಚ್ಛತೆ ಪರಿಶೀಲನೆಗಾಗಿ ಪ್ರತ್ಯಕ್ಷವಾಗಿ ಭೇಟಿ ನೀಡಿದ ಸಂದರ್ಭದಲ್ಲಿ, ಪ್ರತ್ಯಕ್ಷವಾಗಿ ಕಂಡುಬಂದ ಅಸ್ತವ್ಯಸ್ತ ಸ್ಥಿತಿಯನ್ನು ಕಂಡು ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಶೇಕಡಾ 30 ರಷ್ಟು ಸ್ವಚ್ಛತಾ ಸಿಬ್ಬಂದಿ ಕರ್ತವ್ಯಕ್ಕೆ ಗೈರು

ಸ್ಥಳದಲ್ಲಿದ್ದ ಸಾರ್ವಜನಿಕರು ಪ್ರತಿದಿನ ಕಸ ವಿಲೇವಾರಿ ಸರಿಯಾಗಿ ನಡೆಯದೆ ಇಡೀ ಏರಿಯಾ ಗಬ್ಬೆದ್ದು ನಾರುತ್ತಿದ್ದು, ರೋಗರುಜಿನಗಳ ಭೀತಿ ಎದುರಾಗಿದೆ ಎಂದು ಸಚಿವರ ಎದುರು ಆಕ್ರೋಶ ಹೊರಹಾಕಿದರು. ಈ ವೇಳೆ ಪರಿಸ್ಥಿತಿಯನ್ನು ಖುದ್ದಾಗಿ ವೀಕ್ಷಿಸಿದ ಸಚಿವರು, ಆಯಾ ಭಾಗದ ಕಸ ವಿಲೇವಾರಿ ಜವಾಬ್ದಾರಿ ಹೊತ್ತಿರುವ ಶೇಕಡಾ 30 ರಷ್ಟು ಸ್ವಚ್ಛತಾ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದೆ ಗೈರುಹಾಜರಾಗಿರುವುದನ್ನು ಕಂಡು ತೀವ್ರ ಕೋಪಗೊಂಡರು. ಎಲ್ಲಾ ಕಡೆ ಕಸದ ರಾಶಿ ಬಿದ್ದು ದುರ್ವಾಸನೆ ಬೀರುತ್ತಿದ್ದರೂ ಸಿಬ್ಬಂದಿ ಹಾಗೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ, ನಿಮ್ಮ ಈ ನಿರ್ಲಕ್ಷ್ಯದಿಂದಾಗಿ ನಾವು ಪ್ರತಿದಿನ ಜನರಿಂದ ಬೈಸಿಕೊಳ್ಳುವಂತಾಗಿದೆ ಎಂದು ಅಧಿಕಾರಿಗಳು ಹಾಗೂ ಕಾರ್ಮಿಕರನ್ನು ತರಾಟೆಗೆ ತೆಗೆದುಕೊಂಡರು.

ಕೆಲಸ ಮಾಡದಿದ್ದರೂ ನಿಮ್ಮ ಕೆಲಸವನ್ನು ಪರ್ಮನೆಂಟ್ ಮಾಡಬೇಕೇ?

ಇದೇ ಸಮಯದಲ್ಲಿ ಸ್ಥಳದಲ್ಲಿದ್ದ ಕೆಲವು ಸ್ವಚ್ಛತಾ ಕಾರ್ಮಿಕರು ತಮ್ಮ ಸೇವೆಯನ್ನು ಖಾಯಂಗೊಳಿಸುವಂತೆ (ಪರ್ಮನೆಂಟ್ ಮಾಡಲು) ಸಚಿವರಿಗೆ ಮನವಿ ಸಲ್ಲಿಸಲು ಮುಂದಾದರು. ಇದರಿಂದ ಮತ್ತಷ್ಟು ಕೆರಳಿದ ಸಚಿವ ಕೃಷ್ಣ ಬೈರೇಗೌಡ ಅವರು, ಸರಿಯಾಗಿ ಕೆಲಸ ಮಾಡದಿದ್ದರೂ ನಿಮ್ಮ ಕೆಲಸವನ್ನು ಪರ್ಮನೆಂಟ್ ಮಾಡಬೇಕೇ ಎಂದು ನೇರವಾಗಿಯೇ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು. ಮೊದಲು ವಹಿಸಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಗರವನ್ನು ಸ್ವಚ್ಛವಾಗಿಡಿ, ಆ ಬಳಿಕ ಹಕ್ಕುಗಳ ಬಗ್ಗೆ ಮಾತನಾಡಿ ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಕಸ ವಿಲೇವಾರಿಯಲ್ಲಿ ನಿರ್ಲಕ್ಷ್ಯ ವಹಿಸುವ ಸಿಬ್ಬಂದಿ ಹಾಗೂ ಮೇಲ್ವಿಚಾರಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ಏನ್ ಭಗವದ್ಗೀತೆ, ಬೈಬಲ್ ಬರ್ಕೋತ್ತಿದ್ದೀರಾ, ಬರೀ ನಾಟಕ!’: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ತೀವ್ರ ಆಕ್ರೋಶ!

ಬೆಂಗಳೂರು: ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಭಿವೃದ್ಧಿ ಕಾಮಗಾರಿಗಳು ಹಾಗೂ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೌನ್ಸಿಲ್ ಸಭಾಂಗಣದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಹಾಗೂ ಆಡಳಿತಾತ್ಮಕ ವಿಷಯಗಳ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ, ಪ್ರಗತಿ ಪರಿಶೀಲನೆ ವೇಳೆ ಕಂಡುಬಂದ ಲೋಪದೋಷಗಳಿಂದಾಗಿ ಸಚಿವರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯ ನಡುವೆ ಸಚಿವರು ನೀಡುತ್ತಿದ್ದ ಸೂಚನೆಗಳು ಹಾಗೂ ತರಾಟೆಗೆ ತೆಗೆದುಕೊಳ್ಳುತ್ತಿದ್ದ ಸಂದರ್ಭವನ್ನು ಜಿಬಿಎ ಅಧಿಕಾರಿಯೊಬ್ಬರು ಡೈರಿಯಲ್ಲಿ ಬರೆದುಕೊಳ್ಳಲು ಮುಂದಾದಾಗ ಸಚಿವ ಕೃಷ್ಣ ಬೈರೇಗೌಡ ಅವರು ತೀವ್ರವಾಗಿ ಕೆರಳಿದರು. ಇಂತಹ ನಾಟಕ ಮಾಡುವುದರಲ್ಲಿ ನೀವು ನಿಸ್ಸೀಮರು ಎಂದು ನೇರವಾಗಿಯೇ ಕಿಡಿಕಾರಿದ ಸಚಿವರು, ‘ಬರೀ ನಾಟಕ.. ಸಭೆಯಲ್ಲಿ ಆಗ್ಲಿಂದ ಏನ್​​​​​ ರೀ ಬರ್ಕೋತ್ತಿದ್ದೀರಾ? ಭಗವದ್ಗೀತೆ, ಬೈಬಲ್ ಬರ್ಕೋತ್ತಿದ್ದೀರಾ?’ ಎಂದು ಅಧಿಕಾರಿಯನ್ನು ಸಭೆಯಲ್ಲೇ ತೀವ್ರ ತರಾಟೆಗೆ ತೆಗೆದುಕೊಂಡರು. ಸಚಿವರ ಈ ಆಕ್ರೋಶಭರಿತ ಮಾತಿನ ವಿಡಿಯೋ ತುಣುಕು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಈ ಮಹತ್ವದ ಸಭೆಯಲ್ಲಿ ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳಲ್ಲಿ ಕೈಗೆತ್ತಿಕೊಳ್ಳಲಾಗಿರುವ ಮೂಲಸೌಕರ್ಯ, ರಸ್ತೆ ಹಾಗೂ ನಗರ ಅಭಿವೃದ್ಧಿ ಕಾಮಗಾರಿಗಳ ಪ್ರಸ್ತುತ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದುಕೊಂಡರು. ಯೋಜನೆಯ ಅನುಷ್ಠಾನದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸದೆ, ನಿಗದಿತ ಸಮಯದೊಳಗೆ ಕೆಲಸ ಪೂರ್ಣಗೊಳಿಸುವಂತೆ ಹಾಗೂ ಆಡಳಿತ ಯಂತ್ರವನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಯಿತು.

ಇದನ್ನೂ ಓದಿ:  ನನ್ನನ್ನು ದೊರೆ ಎಂದು ಕರೆಯಬೇಡಿ: ಸಾರ್ವಜನಿಕ ವೇದಿಕೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಬಿಗ್ ಸ್ಟೇಟ್‌ಮೆಂಟ್

Leave a Reply

Your email address will not be published. Required fields are marked *