ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ. ಈ ವಿಷಯವಾಗಿ ಅಧಿಕಾರಿಗಳಷ್ಟೇ ಅಲ್ಲದೆ, ಸ್ಥಳೀಯ ಸಾರ್ವಜನಿಕರು ಹಾಗೂ ರೈತರ ಅಭಿಪ್ರಾಯಗಳನ್ನು ಪಡೆದ ನಂತರವೇ ಕೇಂದ್ರಕ್ಕೆ ಆಕ್ಷೇಪಣೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ತೀರ್ಥಹಳ್ಳಿಯಲ್ಲಿ ಸ್ಪಷ್ಟಪಡಿಸಿದ್ದಾರೆ.
ವಿಶೇಷ ಅಧಿವೇಷನ ಕರೆಯಲಾಗಿದೆ ಎಂದ ಸಿಎಂ
ತೀರ್ಥಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕರ ನೇರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಮ್ಮ ಸರ್ಕಾರವೇ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸುವ ನಿರ್ಧಾರ ಕೈಗೊಂಡಿತ್ತು. ಇದೀಗ ಸೆಪ್ಟೆಂಬರ್ ೨೭ ರೊಳಗೆ ಹೊಸದಾಗಿ ಆಕ್ಷೇಪಣೆಗಳನ್ನು ಸಲ್ಲಿಸಲು ಕೇಂದ್ರ ಸರ್ಕಾರ ಕಾಲಾವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದ ಎರಡು ದಿನಗಳ ಕಾಲ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಅಧಿವೇಶನದಲ್ಲಿ ಜನಪ್ರತಿನಿಧಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ರೈತ ಸಂಘಟನೆಗಳ ನಾಯಕರೊಂದಿಗೆ ವಿಸ್ತೃತವಾಗಿ ಚರ್ಚಿಸಿ ಅಂತಿಮ ನಿಲುವು ತಳೆಯಲಾಗುವುದು ಎಂದು ವಿವರಣೆ ನೀಡಿದರು.
ಪರಿಸರ ರಕ್ಷಣೆ ಎಷ್ಟು ಮುಖ್ಯವೋ, ಮಲೆನಾಡ ಭಾಗದ ಜನರ ಮತ್ತು ರೈತರ ಹಿತರಕ್ಷಣೆ ಕೂಡ ಅಷ್ಟೇ ಮುಖ್ಯವಾಗಿದೆ. ರೈತರು ಮತ್ತು ಹಲವು ಸಂಘಟನೆಗಳು ಕಸ್ತೂರಿ ರಂಗನ್ ವರದಿಯಿಂದಾಗುವ ತೊಂದರೆಗಳ ಕುರಿತು ಮನವಿ ಸಲ್ಲಿಸಿವೆ. ರೈತರ ಆತಂಕ ಮತ್ತು ಭಾವನೆಗಳಿಗೆ ನಮ್ಮ ಸರ್ಕಾರ ಸಂಪೂರ್ಣ ಬೆಲೆ ನೀಡಲಿದ್ದು, ಪರಿಸರಕ್ಕೆ ಹಾನಿಯಾಗದಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮಧ್ಯಮ ಮಾರ್ಗ ಕಂಡುಕೊಳ್ಳಲಾಗುವುದು. ಈ ಕುರಿತು ಅರಣ್ಯ ಸಚಿವರೊಂದಿಗೂ ಸೂಕ್ತ ಮಾತುಕತೆ ನಡೆಸುವುದಾಗಿ ಹೇಳಿದರು.
ಮುಳುಗಡೆ ಸಂತ್ರಸ್ತರಿಗೂ ನ್ಯಾಯ ಕೊಡಲಾಗುತ್ತೆ
ಇದೇ ವೇಳೆ ಮುಳುಗಡೆ ಸಂತ್ರಸ್ತರಿಗೆ ದಶಕಗಳಿಂದ ಸೂಕ್ತ ನ್ಯಾಯ ಸಿಗದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಈ ವಿಷಯ ಸರ್ಕಾರದ ಗಮನದಲ್ಲಿದೆ. ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿರುವುದರಿಂದ ಕೊಂಚ ವಿಳಂಬವಾಗಿದೆಯಾದರೂ, ಸಂತ್ರಸ್ತರಿಗೆ ನ್ಯಾಯ ಒದಗಿಸುವುದು ಸರ್ಕಾರದ ಆಡಳಿತಾತ್ಮಕ ಕರ್ತವ್ಯವಾಗಿದೆ ಎಂದರು. ಶಿವಮೊಗ್ಗ ಜಿಲ್ಲೆಯ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸದಿರುವ ಕುರಿತು ಮಾತನಾಡುತ್ತಾ, ಬರ ಘೋಷಣೆಗೆ ತನ್ನದೇ ಆದ ನಿರ್ದಿಷ್ಟ ಮಾನದಂಡಗಳು ಹಾಗೂ ನಿಯಮಾವಳಿಗಳಿವೆ. ಈ ಎಲ್ಲಾ ಜವಬ್ದಾರಿಯುತ ವಿಷಯಗಳ ಕುರಿತು ಮುಂಬರುವ ವಿಶೇಷ ಅಧಿವೇಶನದಲ್ಲಿ ಸಮಗ್ರವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇದನ್ನೂ ಓದಿ: ಅಮಿತ್ ಶಾ ಆರೋಗ್ಯದಲ್ಲಿ ದಿಢೀರ್ ಏರುಪೇರು
