ಬೆಂಗಳೂರು: ಬ್ರಾಹ್ಮಣ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ರೂ.100 ಕೋಟಿ ಬೀಜ ಧನವನ್ನು (Seed Money) ರಾಜ್ಯ ಸರ್ಕಾರವು ನೀಡಬೇಕೆಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು ಸರ್ಕಾರಕ್ಕೆ ಒತ್ತಾಯಿಸಿದರು.
ಮೆಚ್ಚುಗೆ ವ್ಯಕ್ತಪಡಿಸಿದ ದಿನೇಶ್ ಗುಂಡೂ ರಾವ್
ಇಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ಸಾಂದೀಪನಿ ಶಿಷ್ಯವೇತನ ಯೋಜನೆ ಗೆ ಚಾಲನೆ ನೀಡಿ ಅವರು ಮಾತನಾಡಿದ ಅವರು, ಬ್ರಾಹ್ಮಣರ ಅಭಿವೃದ್ಧಿಗೆ ಮಂಡಳಿಯ ಹಲವಾರು ಯೋಜನೆಗಳು ಅತ್ಯಂತ ಯೋಜನಾಕಾರಿಯಾಗಿ ಜಾರಿಯಾಗುತ್ತಿದ್ದು, ಹೆಚ್ಚಿನ ಜನರು ಇದರ ಲಾಭ ಪಡೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಮಂಡಳಿಯ ಸಾಲ ವಸೂಲಾತಿ ಪ್ರಮಾಣ ಶೇಕಡಾ 98 ಕ್ಕಿಂತ ಹೆಚ್ಚಿರುವುದಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ ಅವರು ಮಾತನಾಡುತ್ತಾ, ಆರ್ಥಿಕವಾಗಿ ಹಿಂದುಳಿದ ಸಮುದಾಯದ ಬ್ರಾಹ್ಮಣ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಉದ್ದೇಶದಿಂದ ಸಾಂದೀಪನಿ ಶಿಷ್ಯವೇತನ ಜಾರಿಗೊಳಿಸಲಾಗಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿ ಹಾಗೂ ಸಾಮಾನ್ಯ ಪದವಿ ಕೋರ್ಸ್ ವಿದ್ಯಾರ್ಥಿಗಳಿಗೆ ವಾರ್ಷಿಕ 15,000 ನಿರ್ವಹಣಾ ವೆಚ್ಚ, ಸಿಇಟಿ, ನೀಟ್ ಮತ್ತಿತರೆ ವೃತ್ತಿಪರ ಕೋರ್ಸ್ ಗಳ ಪ್ರವೇಶ ಶುಲ್ಕದ ಎರಡನೇ ಮೂರು ಭಾಗದಷ್ಟು ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ಹೇಳಿದರು.
ಶಿಷ್ಯವೇತನಕ್ಕೆ ಅರ್ಜಿ ಹಾಕುವುದು ಹೇಗೆ?
ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿ ದೀಪಶ್ರೀ.ಕೆ ಅವರು ಸಾಂದೀಪನಿ ಯೋಜನೆಯ ವಿವರಗಳನ್ನು ಹಂಚಿಕೊಳ್ಳುತ್ತಾ, ಶಿಷ್ಯವೇತನ ಸೌಲಭ್ಯ ಪಡೆಯ ಬಯಸುವ ಆಸಕ್ತ ವಿದ್ಯಾರ್ಥಿಗಳು ರಾಜ್ಯದ ಖಾಯಂ ನಿವಾಸಿ ಆಗಿರಬೇಕು ಮತ್ತು ಆರ್ಥಿಕವಾಗಿ ಹಿಂದುಳಿದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿರುತ್ತದೆ ಹೆಚ್ಚಿನ ಮಾಹಿತಿಗೆ ಮಂಡಳಿಯ ಜಾಲತಾಣ ksbdb.karnataka.gov.in ಅಥವಾ ದೂರವಾಣಿ ಸಂಖ್ಯೆ 080-29605888 ಅಥವಾ 8762249230 ನ್ನು ಸಂಪರ್ಕಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ಮಂಡಳಿಯ ಅಧಿಕಾರೇತರ ನಿರ್ದೇಶಕರಾದ ಪಿ ಎಂ ಮಾಲತೇಶ್, ಸಿ ಎನ್ ನಾಗೇಶ್, ಕಶ್ಯಪ್ ನಂದನ್ ಅಧಿಕಾರಿ ನಿರ್ದೇಶಕರಾದ ಶೋಭ ಹೆಚ್ ಎ ಹಾಗೂ ಕಲಾವತಿ ಎಸ್ ಎನ್ ಉಪಸ್ಥಿತರಿದ್ದರು.
ಇದನ್ನೂ ಓದಿ: ಮತದಾರರ ಪಟ್ಟಿ ಪರಿಷ್ಕರಣೆ: ರಾಜ್ಯದಲ್ಲಿ 1.08 ಕೋಟಿ ಮತದಾರರು ಎಎಸ್ಡಿಡಿಒ ವ್ಯಾಪ್ತಿಗೆ
