ಮೈಸೂರು: ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕಾಗಿ 4 ಸಾವಿರದ 500 ರಿಂದ 5 ಸಾವಿರ ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ.
ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು
ಮೈಸೂರಿನಲ್ಲಿ ಕೇಂದ್ರ ಬಜೆಟ್ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-2027ರ ಕೇಂದ್ರ ಬಜೆಟ್ನಲ್ಲಿ ಕಟ್ಟಡ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ – ಅರೈ ಘಟಕ ಸ್ಥಾಪಿಸುವ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಮಂಡ್ಯದಲ್ಲಿ 100 ಎಕರೆ ಭೂಮಿಗೆ ಮನವಿ
ಮಂಡ್ಯದಲ್ಲಿ ಅರೈ ಘಟಕ ಸ್ಥಾಪನೆಗಾಗಿ 100 ಎಕರೆ ಭೂಮಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಈ ಯೋಜನೆಗೆ ಒಟ್ಟು 7 ಸಾವಿರದ 280 ಕೋಟಿ ರೂಪಾಯಿ ಮೀಸಲಿಡಲಾಗಿದ್ದು, ಪ್ರಾಥಮಿಕ ಹಂತದಲ್ಲಿ 500 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುತ್ತದೆ. ಇದರಿಂದ ನಿರುದ್ಯೋಗ ಸಮಸ್ಯೆ ತಗ್ಗಿಸಲು ಸಾಧ್ಯವಾಗಲಿದೆ ಎಂದು ಹೇಳಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಉತ್ತಮ ಸಮನ್ವಯ ಇದ್ದರೆ ರಾಜ್ಯಕ್ಕೆ ಅಗತ್ಯವಿರುವ ಯೋಜನೆಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದ್ದಾರೆ.
