ತುಮಕೂರು: ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ (Road Mishap) ದುರಂತದಲ್ಲಿ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಿರಿಯೂರು ರಸ್ತೆಯ ಮೂಲಕ ಹುಳಿಯಾರಿನತ್ತ ಧಾವಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಅತಿ ವೇಗವಾಗಿ ಬಂದ ಓಮಿನಿ ಮಾರುತಿ ವಾಹನವೊಂದು ನೇರವಾಗಿ ಅಪ್ಪಳಿಸಿದೆ. ಈ ಡಿಕ್ಕಿಯ ವೇಗ ಮತ್ತು ರಭಸ ಎಷ್ಟಿತ್ತೆಂದರೆ, ನಿಯಂತ್ರಣ ತಪ್ಪಿದ ಮತ್ತೊಂದು ಕಾರು ರಸ್ತೆಯ ಬದಿಯ ಹಳ್ಳಕ್ಕೆ ಉರುಳಿಬಿದ್ದಿದೆ.
ಈ ದುರಂತದಲ್ಲಿ ಕಾರಿನೊಳಗಿದ್ದ ಮೂವರು ಪ್ರಯಾಣಿಕರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದು, ಇವರೆಲ್ಲರೂ ಮೂಲತಃ ಆಂಧ್ರಪ್ರದೇಶದ ನಿವಾಸಿಗಳು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಅಪಘಾತದ ಸದ್ದು ಕೇಳಿ ಓಡಿಬಂದ ಸ್ಥಳೀಯರು ತಕ್ಷಣವೇ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ನೆಲಮಂಗಲ ಹೆದ್ದಾರಿಯಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ಮಹಾ ದುರಂತ!
ಇತ್ತ ನೆಲಮಂಗಲ ತಾಲೂಕಿನ ಕುಣಿಗಲ್ ಬೈಪಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರೋಗಿಯೊಬ್ಬರನ್ನು ಹೊತ್ತು ಸಾಗುತ್ತಿದ್ದ ಆ್ಯಂಬುಲೆನ್ಸ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಹಾಸನ ಜಿಲ್ಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರೋಗಿಯೊಬ್ಬರನ್ನು ತುರ್ತು ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್, ಮಾರ್ಗಮಧ್ಯೆ ಕ್ಯಾಂಟರ್ ವಾಹನಕ್ಕೆ ಜೋರಾಗಿ ಅಪ್ಪಳಿಸಿದೆ.
ಅಪಘಾತದ ಭೀಕರತೆಗೆ ಆ್ಯಂಬುಲೆನ್ಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದರೂ, ಅದೃಷ್ಟವಶಾತ್ ಅದರಲ್ಲಿದ್ದ ರೋಗಿ, ಚಾಲಕ ಹಾಗೂ ವೈದ್ಯಕೀಯ ಸಿಬ್ಬಂದಿ ಯಾವುದೇ ಪ್ರಾಣಾಪಾಯವಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾರೆ. ಡಿಕ್ಕಿ ಸಂಭವಿಸುತ್ತಿದ್ದಂತೆ ಹೆದ್ದಾರಿಯಲ್ಲಿದ್ದ ಸಾರ್ವಜನಿಕರು ತಕ್ಷಣವೇ ಆ್ಯಂಬುಲೆನ್ಸ್ನಲ್ಲಿದ್ದ ರೋಗಿಯನ್ನು ಅತ್ಯಂತ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಬಳಿಕ ತಡಮಾಡದೆ ಪರ್ಯಾಯ ವಾಹನದ ವ್ಯವಸ್ಥೆ ಮಾಡಿ ಆ ರೋಗಿಯನ್ನು ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಿಕೊಡುವ ಮೂಲಕ ಸಾರ್ವಜನಿಕರು ಮಾನವೀಯತೆ ಮೆರೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಕ್ಯಾಂಟರ್ ವಾಹನಕ್ಕೂ ಹಾನಿಯಾಗಿದ್ದು, ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಸದ್ಯ ಸಂಚಾರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
