ಕೇರಳಂ: ಪಶ್ಚಿಮ ಏಷ್ಯಾದಲ್ಲಿ ಎದುರಾಗಿರುವ ಬಿಕ್ಕಟ್ಟು ದೇಶದ ಜನರ ಮೇಲೆ ಪರಿಣಾಮ ಬೀರದಂತೆ ಕೇಂದ್ರ ಸರ್ಕಾರ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.
ಭಾರತೀಯರ ಸುರಕ್ಷತೆಗೆ ಸಕಲ ಕ್ರಮ
ಕೇರಳಂ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಾಲಕ್ಕಾಡ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಶ್ಚಿಮ ಏಷ್ಯಾ ದೇಶಗಳ ಮುಖ್ಯಸ್ಥರೊಂದಿಗೆ ಸಂಪರ್ಕದಲ್ಲಿದ್ದು, ಸಂಘರ್ಷ ವಲಯದಲ್ಲಿರುವ ಭಾರತೀಯರ ಸುರಕ್ಷತೆಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಸಂಘರ್ಷದ ಸೂಕ್ಷ್ಮ ವಿಚಾರಗಳಲ್ಲಿ ಪಕ್ಷಗಳು ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ಗಲ್ಫ್ ರಾಷ್ಟ್ರಗಳಲ್ಲಿ ಒಂದು ಕೋಟಿಗೂ ಅಧಿಕ ಭಾರತೀಯರು ವಾಸಿಸುತ್ತಿದ್ದು, ಅವರ ಸುರಕ್ಷತೆಗೂ ಒತ್ತು ನೀಡಲಾಗಿದೆ ಎಂದು ಹೇಳಿದರು.
ಪಾಲಕ್ಕಾಡ್ನಲ್ಲಿ ಮೋದಿ ರೋಡ್ ಶೋ
ಕೇಂದ್ರ ಸರ್ಕಾರ ಮಹಿಳಾ ಆಧಾರಿತ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ನೀಡಿದೆ. ಆರ್ಥಿಕ ಒಳಗೊಳ್ಳುವಿಕೆ, ಹಣಕಾಸು, ವಸತಿ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಜೊತೆಗೆ ನಾರಿಶಕ್ತಿ ವಂದನ್ ಅಧಿನಿಯಮ ಮಸೂದೆಯನ್ನು ಸಂಸತ್ ನಲ್ಲಿ ಅಂಗೀಕರಿಸಿದ್ದು, ಇದರಿಂದ ವಿಧಾನಸಭೆ ಮತ್ತು ಸಂಸತ್ ನಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾಗಲಿದೆ ಎಂದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಪಾಲಕ್ಕಾಡ್ ನಲ್ಲಿ ರೋಡ್ ಶೋ ನಡೆಸಿದರು. ರಸ್ತೆಯ ಎರಡೂ ಬದಿಗಳಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಭಾಗಿಯಾಗಿದ್ದರು. ಬಳಿಕ ತ್ರಿಶೂರ್ ನಲ್ಲಿ ನಡೆದ ರೋಡ್ ಶೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದರು. ಈ ವೇಳೆ ಕೇಂದ್ರ ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ರೋಡ್ ಶೋ ವೇಳೆ ಮಕ್ಕಳು, ಸಾರ್ವಜನಿಕರು ಸೇರಿದಂತೆ ಪ್ರಧಾನಿ ಅವರಿಗೆ ಪುಷ್ಪ ವೃಷ್ಠಿ ಗೈದರು.
ಇದನ್ನೂ ಓದಿ: ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೊದಲ ಹಂತಕ್ಕೆ ಚಾಲನೆ ನೀಡಿದ ಮೋದಿ
