Mallikarjun Kharge: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ, ಸಂಸತ್ತು ಹೈಜಾಕ್‌ ಮಾಡೋಕೆ ಬಿಡಲ್ಲ

Why opposition are against delimitation Mallikarjun Kharge taunts center

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಸೇರಿದಂತೆ ಮೂರು ಪ್ರಮುಖ ವಿಧೇಯಕಗಳ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕೆಂಡಕಾರಿದ್ದಾರೆ. ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ನೆಪದಲ್ಲಿ ಕೇಂದ್ರ ಸರ್ಕಾರವು ದೋಷಪೂರಿತ ಕ್ಷೇತ್ರ ಪುನರ್ ವಿಂಗಡಣೆ ವಿಧೇಯಕವನ್ನು ಕಳ್ಳತನದಿಂದ ಜಾರಿಗೆ ತರಲು ಸಂಚು ರೂಪಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಮಹಿಳಾ ಮೀಸಲಾತಿಯ ಮುಖವಾಡ ಧರಿಸಿ ಸಂವಿಧಾನ ಮತ್ತು ಸಂಸತ್ತನ್ನು ಹೈಜಾಕ್ ಮಾಡಲು ನಾವು ಬಿಡುವುದಿಲ್ಲ ಎಂದು ಖರ್ಗೆ ಗುಡುಗಿದ್ದು, ಪ್ರಜಾಪ್ರಭುತ್ವದ ಮೇಲಿನ ಈ ದಾಳಿಯ ವಿರುದ್ಧ ಹೋರಾಡುವುದಾಗಿ ಎಚ್ಚರಿಸಿದ್ದಾರೆ.

ಸರ್ಕಾರದ ವಿರುದ್ಧ ವಾಗ್ದಾಳಿ

ಕಾಂಗ್ರೆಸ್ ಸಂಸದ ಶಶಿ ತರೂರ್ ಕೂಡ ಇದೇ ಧಾಟಿಯಲ್ಲಿ ಮಾತನಾಡಿದ್ದು, ಆಡಳಿತ ಪಕ್ಷವು ಪ್ರಬಲವಾಗಿರುವ ಪ್ರದೇಶಗಳಲ್ಲಿ ಲೋಕಸಭಾ ಸ್ಥಾನಗಳನ್ನು ಹೆಚ್ಚಿಸಲು ಸರ್ಕಾರ ಈ ಯೋಜನೆಯನ್ನು ರೂಪಿಸಿದೆ ಎಂದು ಟೀಕಿಸಿದ್ದಾರೆ. 2023ರಲ್ಲಿ ತಂದಿದ್ದ ತಿದ್ದುಪಡಿಗಳನ್ನು ಮತ್ತೆ ಬದಲಿಸುವ ಮೂಲಕ ಮಹಿಳಾ ಮೀಸಲಾತಿಯನ್ನು ಕೇವಲ ಒಂದು ನೆಪವಾಗಿ ಬಳಸಿಕೊಳ್ಳಲಾಗುತ್ತಿದೆ ಎಂಬುದು ಪ್ರತಿಪಕ್ಷಗಳ ಪ್ರಮುಖ ಆರೋಪವಾಗಿದೆ. ಕೇಂದ್ರ ಸರ್ಕಾರದ ಪ್ರಸ್ತಾಪದಂತೆ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಈಗಿರುವ 543 ರಿಂದ 850ಕ್ಕೆ ಏರಿಸಲು ಉದ್ದೇಶಿಸಲಾಗಿದೆ. ಇದರಲ್ಲಿ 815 ಸ್ಥಾನಗಳನ್ನು ರಾಜ್ಯಗಳಿಗೆ ಮತ್ತು 35 ಸ್ಥಾನಗಳನ್ನು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ.

ಜನಸಂಖ್ಯೆ ಹೆಚ್ಚಳ ಮತ್ತು ನಗರೀಕರಣದ ಹಿನ್ನೆಲೆಯಲ್ಲಿ ಈ ಬದಲಾವಣೆ ಅನಿವಾರ್ಯ ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದೆ. ಆದರೆ, ಈ ಸ್ಥಾನಗಳ ಹಂಚಿಕೆಯು ಹಿಂದಿ ಭಾಷಿಕ ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚು ಲಾಭ ತಂದುಕೊಡಲಿದ್ದು, ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಿರುವ ದಕ್ಷಿಣ ಭಾರತದ ರಾಜ್ಯಗಳ ಪ್ರಾತಿನಿಧ್ಯವನ್ನು ಕುಗ್ಗಿಸಲಿದೆ ಎಂಬ ಭೀತಿ ಎದುರಾಗಿದೆ. ದಕ್ಷಿಣದ ರಾಜ್ಯಗಳ ಹಿತಾಸಕ್ತಿಗೆ ಧಕ್ಕೆ ತರುವ ಈ ನಡೆಯ ವಿರುದ್ಧ ಸಂಸತ್ತಿನಲ್ಲಿ ಭಾರಿ ಗದ್ದಲ ಉಂಟಾಗಿದೆ.

ವಿರೋಧ ಪಕ್ಷಗಳ ಆಕ್ಷೇಪಕ್ಕೆ ಉತ್ತರಿಸಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮಹಿಳಾ ಸಬಲೀಕರಣದ ವಿಷಯದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಕೋರಿದ್ದಾರೆ. 2029ರ ಚುನಾವಣೆಯ ವೇಳೆಗೆ ಮಹಿಳಾ ಮೀಸಲಾತಿ ಜಾರಿಯಾಗಬೇಕಾದರೆ ಈ ವಿಧೇಯಕಗಳು ತಾಂತ್ರಿಕವಾಗಿ ಅಗತ್ಯ ಎಂದು ಸರ್ಕಾರ ವಾದಿಸುತ್ತಿದೆ. ಆದರೆ, ದಕ್ಷಿಣದ ರಾಜ್ಯಗಳಿಗೆ ಆಗುವ ಅನ್ಯಾಯ ಮತ್ತು ಲೋಕಸಭಾ ಸ್ಥಾನಗಳ ಭಾರಿ ಹೆಚ್ಚಳದ ವಿಚಾರವಾಗಿ ಸಂಸತ್ತಿನಲ್ಲಿ ಈಗ ಪರ-ವಿರೋಧದ ಚರ್ಚೆ ತಾರಕಕ್ಕೇರಿದ್ದು, ವಿಶೇಷ ಅಧಿವೇಶನವು ಸಂಘರ್ಷದ ಕಣವಾಗಿ ಮಾರ್ಪಟ್ಟಿದೆ.

ಇದನ್ನೂ ಓದಿ: ಸಂಸತ್ತಿನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ಬ್ಯಾಟಿಂಗ್: ವಿರೋಧ ಪಕ್ಷಗಳದ್ದು ಮೊಸಳೆ ಕಣ್ಣೀರು ಎಂದು ವಾಗ್ದಾಳಿ

Leave a Reply

Your email address will not be published. Required fields are marked *